ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ

Oct 14, 2025 - 13:11
ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಮಂಗಳವಾರದಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಬೃಹತ್ ಮೆರವಣಿಗೆ ಮತ್ತು ಪ್ರತಿಭಟನೆಯು ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ನಡೆಯಿತು.

ಪ್ರತಿಭಟನೆಯನ್ನು ಉದ್ಘಾಟಿಸುತ್ತಾ ಫೆಡರೇಶನ್ ರಾಜ್ಯ ಸಮಿತಿಯ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರುರವರು ಮಾತನಾಡುತ್ತಾ ಲಕ್ಷಾಂತರ ಜನತೆಗೆ ಸಂಬಂಧಿಸಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ನಾಟಕ ಮಾಡುತ್ತಿರುವುದು ಖಂಡನೀಯ. ಕಳೆದ ಮೂರುವರೆ ತಿಂಗಳಿನಿಂದ ಈ ಸಮಸ್ಯೆಯನ್ನು ಪರಿಹರಿಸದೆ ಇರುವುದು ಆಕ್ಷೇಪಾರ್ಹವಾಗಿದೆ. ಕೆಲಸ ಕಳೆದುಕೊಂಡು ತೊಂದರೆಗೊಳಗಾದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಒಂದು ಕಡೆಯಾದರೆ ಮನೆ ಕಟ್ಟಲು ಸಾಧ್ಯವಾಗದೆ ಕಚ್ಛಾ ವಸ್ತುಗಳಿಗೆ ವಿಪರೀತ ಬೆಲೆ ತೆರಬೇಕಾದ ಜನಸಾಮಾನ್ಯರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಳುವ ಪಕ್ಷದವರು ಸಮಸ್ಯೆ ಇತ್ಯರ್ಥವಾಗಿದೆ ಎಂದು ಡಂಗುರ ಸಾರುತ್ತಿದ್ದಾರೆ. ಇದರ ಲಾಭವನ್ನು ಅನಧಿಕೃತ ವ್ಯಕ್ತಿ ಸಂಸ್ಥೆಗಳು ಪಡೆಯುವಂತಾಗಿದೆ. ಏರಿಕೆಯಾದ ಕೆಂಪು ಕಲ್ಲಿನ ದರ ಮತ್ತು ಮರಳಿನ ದರವನ್ನು ಜನಪರವಾಗಿ ನಿರ್ಧರಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಬೇಕೆಂದು ಕೇಳಿಕೊಂಡು ಒತ್ತಾಯಿಸಿ ಹತ್ತು ದಿನಗಳಾದರೂ ದಿವ್ಯ ಮೌನವೇ ಉತ್ತರವಾಗಿದೆ. ಸಾಮಾನ್ಯ ಜನರ ತಾಳ್ಮೆಗೂ ಮಿತಿ ಇರಲಿ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಸಮಸ್ಯೆ ಶಾಶ್ವತ ಪರಿಹಾರವಾಗುವ ತನಕ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ ಮಾಸಿಕವಾಗಿ ರೂ.ಹತ್ತು ಸಾವಿರದಂತೆ ಪರಿಹಾರ ಮೊತ್ತ ನೀಡಬೇಕೆಂದು ಒತ್ತಾಯಿಸಿದರು.

ಫೆಡರೇಶನ್ ಜಿಲ್ಲಾ ಕಾರ್ಯದರ್ಶಿ ಚಂದ್ರಹಾಸ ಪಿಲಾರ್ ಮಾತನಾಡುತ್ತಾ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನಗತ್ಯ ಕಿರುಕುಳ ನೀಡುವುದರ ಬದಲು ಎಲ್ಲಾ ನೋಂದಾಯಿತ ಕಾರ್ಮಿಕರಿಗೆ ನೀಡಬೇಕಾದ ಸವಲತ್ತನ್ನು ಸರಳವಾಗಿ ಮತ್ತು ಸರಾಗವಾಗಿ ನೀಡುತ್ತಿರಬೇಕು. ಹಾಗೆನೇ ಜಿಲ್ಲಾಡಳಿತದ ಕಾನೂನು ಕ್ರಮ ಕಟ್ಟುನಿಟ್ಟಿನ ನಿಯಮಗಳು ಅಭಿನಂದನಾರ್ಹವಾಗಿದ್ದರೂ ಕೆಂಪು ಕಲ್ಲು ಮತ್ತು ಮರಳು ಲಭ್ಯವೇ ಇಲ್ಲದ ಸ್ಥಿತಿ ನಿರ್ಮಾಣವಾದರೆ ಏನು ಪ್ರಯೋಜನ ಎಂದು ಅವರು ಪ್ರಶ್ನಿಸಿದರು. ಈ ರೀತಿಯ ಕಾನೂನು ಕ್ರಮಗಳಿಂದ ಜನಸಾಮಾನ್ಯರಿಗೆ ತೊಂದರೆಗಳಾದರೆ ಅದರ ಲಾಭವನ್ನು ದುಷ್ಕರ್ಮಿಗಳೇ ಪಡೆಯುತ್ತಾರೆ. ಆದುದರಿಂದ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತ ಮುಂದುವರಿಯಬೇಕೆಂದು ಅವರು ಹೇಳಿದರು.

ವಲಸೆ ಕಾರ್ಮಿಕರಾದ ಬಿಹಾರದ ಅಲ್ತಾಪ್‍ರವರು ಮಾತನಾಡುತ್ತಾ ಕೆಲಸಕ್ಕಾಗಿ ಅಲೆದಾಡುತ್ತಾ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ನಾವು ಕೆಲಸವಿಲ್ಲದೆ ಬಿಕಾರಿಗಳಾಗಿದ್ದೇವೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಅಸ್ಸಾಂನಿಂದ ನಾವುಗಳು ಇಲ್ಲಿ ಬಂದು ಕೆಲಸ ಮಾಡಿ ಜೀವನ ನಡೆಸುತ್ತಿದ್ದೇವೆ. ಕೆಲಸವಿಲ್ಲದ ಸ್ಥಿತಿ ನಿರ್ಮಾಣಗೊಂಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಕೂಡಲೇ ಈ ಸಮಸ್ಯೆಯನ್ನು ಪರಿಹರಿಸಬೇಕೆಂದು ವಿನಂತಿಸಿದರು.ಪ್ರಾರಂಭದಲ್ಲಿ ಫೆಡರೇಶನ್ ಜಿಲ್ಲಾ ಪದಾಧಿಕಾರಿ ರವಿಚಂದ್ರ ಕೊಂಚಾಡಿಯವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಕೊನೆಯಲ್ಲಿ ಫೆಡರೇಶನ್ ಪದಾಧಿಕಾರಿ ವಸಂತಿಯವರು ಧನ್ಯವಾದಗೈದರು. ಪ್ರತಿಭಟನಾ ಪ್ರದರ್ಶನ ನೇತೃತ್ವವನ್ನು ಫೆಡರೇಶನ್ ಮುಂದಾಳುಗಳಾದ ಜನಾರ್ಧನ ಕುತ್ತಾರ್, ರಾಮಚಂದ್ರ ಪಜೀರ್, ರೋಹಿತಾಶ್ವ, ಬಶೀರ್ ಪಜೀರ್, ಬಿಜು ಅಗಸ್ತೀನ್, ವಿಶ್ವನಾಥ ನೆಲ್ಲಿ ಬಂಗಾರಡ್ಕ, ವಸಂತ ಪೇಲ್ತಡ್ಕ, ಆನಂದ ಗೌಡ, ಕೃಷ್ಣಪ್ಪ ಪೂಜಾರಿ, ಜಯಾನಂದ ಮಾರೂರು, ಕೃಷ್ಣಪ್ಪ ನಡಿಗುಡ್ಡೆ, ಶೀನ ಬೆಳುವಾಯಿ, ಸುಧಾಕರ ಹಂಡೇಲು, ಶಾಂತ, ದಿನೇಶ ಇರುವೈಲ್, ರವೀಂದ್ರ ಮುಚ್ಚೂರು, ನೋಣಯ್ಯ ಗೌಡ, ದಿನೇಶ್ ಶೆಟ್ಟಿ ಜಪ್ಪಿನಮೊಗರು, ಹೆರಾಲ್ಡ್, ಅಶೋಕ ಸಾಲ್ಯಾನ್, ದಯಾನಂದ ಕೊಂಚಾಡಿ, ಶಶಿಧರ ಶಕ್ತಿನಗರ, ಅಶೋಕ ಶ್ರೀಯಾನ್ ಮುಂತಾದವರು ವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0