ಫಾಝಿಲ್ ಹತ್ಯೆ ಆರೋಪಿ, ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ಹಿಂದೂ ಸಂಘಟನೆಯಿಂದ ಖಾಸಗಿ ಬಸ್ಸಿಗೆ ಕಲ್ಲು ತೂರಾಟ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಕರೆ
ಮಂಗಳೂರು: ಫಾಝಿಲ್ ಹತ್ಯೆ ಆರೋಪಿ ರೌಡಿ ಶೀಟರ್, ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ(32) ಎಂಬಾತನನ್ನು ನಾಲ್ವರ ತಂಡ ನಡುರಸ್ತೆಯಲ್ಲೇ ತಲವಾರಿನಲ್ಲಿ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರಿನ ಹೊರವಲಯದ ಬಜ್ಪೆ ಕಿನ್ನಿಪದವು ಎಂಬಲ್ಲಿ ರಾತ್ರಿ 8.30ಸುಮಾರಿಗೆ ನಡೆದಿದೆ.
ಎರಡು ವರ್ಷಗಳ ಹಿಂದೆ ನಡೆದಿದ್ದ ಸುರತ್ಕಲ್ ನಲ್ಲಿ ಫಾಜಿಲ್ ಎಂಬ ಯುವಕನ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ, ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯ ಸುಹಾಸ್ ಶೆಟ್ಟಿ ಕೊಲೆಯಾದವನು.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ಮಾಡಲಾಗಿತ್ತು. ಇದೀಗ ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ.
ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಎಂಬಲ್ಲಿ ತಲವಾರು ದಾಳಿ ನಡೆಸಿದ್ದು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಕೊಚ್ಚಿ ಕೊಚ್ಚಿ ಕೊಂದು ಹಾಕಿದ್ದಾರೆ. ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹಲವು ಕೊಲೆ, ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಮೃತದೇಹ ಎ.ಜೆ.ಆಸ್ಪತ್ರೆಯಲ್ಲಿದೆ. ಎ.ಜೆ.ಆಸ್ಪತ್ರೆ ಮುಂಭಾಗ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಮತ್ತು ಹಿಂದೂ ಸಂಘಟನೆ ನಾಯಕರ ಆಗಮಿಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗು ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಹಿಂದೂ ಸಂಘಟನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಕರೆ ಬೆನ್ನಲ್ಲೇ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ನಗರದ ಖಾಸಗಿ ಬಸ್ ಗಳ ಮೇಲೆ ಹಿಂದೂ ಸಂಘಟನೆಯ ದುಷ್ಕರ್ಮಿಗಳು ಕಲ್ಲು ತೂರಿದ್ದು, ಮೂರು ಬಸ್ ಗಳಿಗೆ ಹಾನಿಯಾಗಿದೆ. ಇಂದು ಮುಂಜಾನೆ ಚಲಿಸುತ್ತಿದ್ದ ಬಸ್ ಗೆ ಹಿಂದೂ ಸಂಘಟನೆಯ ದುಷ್ಕರ್ಮಿಗಳ ತಂಡ ಕಲ್ಲು ತೂರಿದ್ದು, ಈ ಹಿನ್ನೆಲೆ ನಗರದಲ್ಲಿ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಮೇ.5ರ ಸಂಜೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಬೆಂಗಳೂರಿನಿಂದ ಬಂದ ನಾಲ್ಕು ಬಸ್ಗಳಿಗೆ ಹಿಂದೂ ಸಂಘಟನೆಯ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲೆಸೆದಿದ್ದಾರೆ. ಇದರ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಪಂಪ್ವೆಲ್ ಬಳಿ ನಾಲ್ಕು ಬಸ್ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಬಸ್ಗಳ ಗಾಜು ಒಡೆದಿವೆ. ಹಾಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಪಿ.ಯು. ಗಣಿತ ಪರೀಕ್ಷೆ- 2 ಶುಕ್ರವಾರ ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು. ಬಹುತೇಕ ಅಂಗಡಿಗಳು ಮುಚ್ಚಿದ್ದು ನಗರದಲ್ಲಿ ಜನಸಂಚಾರ ವಿರಳವಾಗಿದೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0



