ʻಅನ್ನಭಾಗ್ಯʼ ಫಲಾನುಭವಿಗಳಿಗೆ ಏಪ್ರಿಲ್ ನಿಂದ ತಲಾ 10 ಕೆಜಿ ಅಕ್ಕಿ ವಿತರಣೆ: ಸಚಿವ ಕೆ.ಹೆಚ್. ಮುನಿಯಪ್ಪ

Mar 18, 2025 - 16:16
ʻಅನ್ನಭಾಗ್ಯʼ ಫಲಾನುಭವಿಗಳಿಗೆ ಏಪ್ರಿಲ್ ನಿಂದ ತಲಾ 10 ಕೆಜಿ ಅಕ್ಕಿ ವಿತರಣೆ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಏಪ್ರಿಲ್ ತಿಂಗಳಿನಿಂದ ತಲಾ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ ತಿಂಗಳಿನಿಂದ ತಲಾ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ, ರಾಜ್ಯಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ದವಿದೆ.
ಕೊಟ್ಟ ಮಾತಿನಂತೆ ಅಕ್ಕಿ ಕೊಡುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ನಿರ್ಣಯ ಮಾಡಿದಂತೆ ಹೆಚ್ಚುವರಿ ಅಕ್ಕಿಗೆ ಹಣ ಕೊಟ್ಟಿದ್ದೆವು ಎಂದರು. ಈಗ ನಮ್ಮ ಬಳಿ ಅಕ್ಕಿ ಇದೆ, ಕೇಂದ್ರ ಸರ್ಕಾರವೂ ಅಕ್ಕಿ ಕೊಡಲು ನಿರ್ಧರಿಸಿದೆ ಎಂದರು.
ಇನ್ನು ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ಸೇರಿಸಿ ಈ ತಿಂಗಳು 15 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಹಣವನ್ನು ವರ್ಗಾಹಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರುವರಿ-2025ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯನ್ನು ಸಾರ್ವಜನಿಕರ ವಿತರಣಾ ಪದ್ಧತಿಯಲ್ಲಿ ವಿತರಿಸಲು ಸರ್ಕಾರವು ಆದೇಶಿಸಿರುತ್ತದೆ.
ಅದರಂತೆ ಪಡಿತರ ಚೀಟಿಯಲ್ಲಿನ ಫಲಾನುಭವಿಗಳಿಗೆ ಮಾರ್ಚ್-2025ರ ಮಾಹೆಗೆ ಫೆಬ್ರುವರಿ-2025ರ 5 ಕೆ.ಜಿ ಅಕ್ಕಿ ಸೇರಿಸಿ, ಹಂಚಿಕೆ ಮಾಡಲಾದ ಪಡಿತರ ಪ್ರಮಾಣದಂತೆ ಅದ್ಯತಾ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 15 ಕೆ.ಜಿ ಅಕ್ಕಿ, ಮೂರು ಸದಸ್ಯರಿಗಿಂತ ಕಡಿಮೆ ಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗೆ 35ಕೆ.ಜಿ ಅಕ್ಕಿ, ನಾಲ್ಕು ಸದಸ್ಯರಿಗಿಂತ ಹೆಚ್ಚು ಸದಸ್ಯರನ್ನು ಹೊಂದಿರುವ ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯೊಂದಿಗೆ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆ ತಿಳಿಸಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0