ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ

Aug 19, 2025 - 09:46
ವಿಶ್ವ ದಾಖಲೆ ಪುಟಕ್ಕೆ ಶಕ್ತಿ ಯೋಜನೆ ಸೇರ್ಪಡೆ: ಸಚಿವ ರಾಮಲಿಂಗಾರೆಡ್ಡಿ ಸಂತಸ

ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯಡಿ 500 ಕೋಟಿ ಟಿಕೆಟ್ ವಿತರಿಸುವ ಮೂಲಕ ವಿಶ್ವ ದಾಖಲೆ ಮಾಡಿದೆ.

ಸರ್ಕಾರದ ಮಹತ್ವಾಕಾಂಕ್ಷೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (ಜೂನ್ 11, 2023 – ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು‌ ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ‌ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರಂಟಿ ಯೋಜನೆಯಾದ ಶಕ್ತಿ‌ ಯೋಜನೆಯು‌ ಅತ್ಯಂತ ಸವಾಲಿನಿಂದ‌ ಕೂಡಿದ್ದಾಗಿತ್ತು. ಕಳೆದ ಐದಾರು ವರುಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ, ಹೊಸ‌ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ‌ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ತೃಪ್ತಿ ತಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಎರಡು ವರುಷಗಳ‌ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌ 5800 ಹೊಸ ಬಸ್ಸುಗಳ ಸೇರ್ಪಡೆ, 10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನೂ ನಾನು ಇತ್ಯರ್ಥಪಡಿಸಲು ಸಾಧ್ಯವಿಲ್ಲ. ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ ಎಂದು ರಾಮಲಿಂಗಾರೆಡ್ಡಿ ಮನದಾಳದ ಮಾತನ್ನಾಡಿದ್ದಾರೆ.

Beyond Free Rides- ಎಂಬ ಹೆಸರಿನಲ್ಲಿ Sustainable Mobility Network ನವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ – ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯ ಹೆಚ್ಚಳವಾಗಲೂ ಕಾರಣವಾಗಿದೆ.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ಸಚಿವರು ಹೇಳಿದ್ದಾರೆ.

ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ‌ ಡಿ.ಕೆ‌. ಶಿವಕುಮಾರ್ ಬಲವಾಗಿ ನಂಬಿದ್ದಾರೆ. ಈ‌ ಚಾರಿತ್ರಿಕ ಸಾಧನೆಯು ಕೆಎಸ್ಆರ್‌ಟಿಸಿ, ಬಿಎಂಟಿ‌ಸಿ, ವಾ‌ಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ‌ ಆಡಳಿತ ಮಂಡಳಿ, ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಮರ್ಪಿಸಲಾಗಿದೆ. ಸಮಸ್ತ ಸಿಬ್ಬಂದಿಗಳ ಪರಿಶ್ರಮ, ಕಾರ್ಯತತ್ಪರತೆ ಮತ್ತು ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ‌ ಮುಖಂಡರುಗಳ ಸಹಕಾರವನ್ನು‌ ಮರೆಯುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0