ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ

Apr 7, 2025 - 10:57
ರಾಜ್ಯದ ಶಕ್ತಿಕೇಂದ್ರಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ! ಯು.ಟಿ. ಖಾದರ್’ಗೆ ಅಭಿನಂದನೆ‌ ತಿಳಿಸಿದ ಸಿದ್ದರಾಮಯ್ಯ
ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು

ಬೆಂಗಳೂರು: ನಾಡಿನ ಶಕ್ತಿಕೇಂದ್ರ ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್‌ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ವಿಧಾನಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಸಾರ್ವಜನಿಕರ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿ ಮಾತನಾಡಿ, ಸಂಸತ್ತು ಮತ್ತು ವಿಧಾನಸೌಧ ಜನರ, ರಾಜ್ಯದ ಹಾಗೂ ದೇಶದ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು. ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆ ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು ಎಂದು ಹೇಳಿದರು.

ಜನರ ಕೆಲಸ ಸರಿಯಾಗಿ ಮಾಡಲು ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ. ಈ ಉದ್ದೇಶಕ್ಕಾಗಿ ವಿಧಾನಸೌಧ ಕಟ್ಟಿಸಲಾಗಿದೆ. ಈ ಉದ್ದೇಶ ಈಡೇರಿಸಿ ಜನರ ಸಮಸ್ಯೆ ಬಗೆಹರಿಸುವ ಶಕ್ತಿ ನಮಗೆ ಬರಲಿ, ರಾಜ್ಯದ ಜನತೆಗೂ ಆರ್ಥಿಕ ಶಕ್ತಿ ತರಲು ಯತ್ನಿಸೋಣ. ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಅಳವಡಿಸಲು ಕಾಳಜಿ ವಹಿಸಿ ಕಾರ್ಯಗತ ಮಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಳವಡಿಕೆ ಮಾಡಲಾದ ಬಣ್ಣ ಬಣ್ಣದ ವಿದ್ಯುತ್ ದೀಪಗಳು ಐತಿಹಾಸಿಕ ವಿಧಾನಸೌಧದ ಮೆರುಗನ್ನು ಹೆಚ್ಚಿಸುವ ಜೊತೆಗೆ ನೋಡಗರ ಕಣ್ಮನ ಸೆಳೆಯಲಿದೆ. ಇನ್ನು ಮುಂದೆ ಪ್ರತೀ ಶನಿವಾರ ಮತ್ತು ರವಿವಾರ ರಾತ್ರಿ ಹೊತ್ತಿನಲ್ಲಿ ವಿಧಾನಸೌಧ ದೀಪಾಲಂಕಾರದಲ್ಲಿ ಜಗಮಗಿಸಲಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0